ಪುಟಗಳು

ಅಂಕಿತ ಹೊಸ ಪುಸ್ತಕ ಬಿಡುಗಡೆ

ಕನ್ನಡ ಮಾತಿನ ಮಲ್ಲ ಸ್ಪರ್ದೆಗೆ ಆಹ್ವಾನ

ಅನಕ್ಷರಸ್ತರಿಗೊಂದು ಉಚಿತ ಫೋನ್

ಹುಷಾರು! ನಾಸಾ ಉಪಗ್ರಹ ಅವಶೇಷ ತಲೆ ಮೇಲೆ ಬೀಳಬಹುದು

ಹೈದರಾಬಾದ್, ಸೆ.21: ಮೇಲ್ಮೈ ವಾತಾವರಣ ಸಂಶೋಧನಾ ಉಪಗ್ರಹದ (ಯುಎಆರ್ಎಸ್‌) ಭಗ್ನಾವಶೇಷಗಳು ಮುಂದಿನ ಕೆಲವು ದಿನಗಳಲ್ಲಿ (ಸೆ.23) ಭೂಮಿಗೆ ಬಡಿಯುವ ನಿರೀಕ್ಷೆಯಿದೆ ಎಂದು ನಗರದ ಬಿಎಂ ಬಿರ್ಲಾ ವಿಜ್ಞಾನ ಕೇಂದ್ರದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಮೆರಿಕದ ನಾಸಾ ವಿಜ್ಞಾನಿಗಳ ಪ್ರಕಾರ ಅದು ಯಾವುದಾದರೂ ಸಾಗರ, ಸಮುದ್ರದಲ್ಲಿ ಬೀಳುವ ಸಾಧ್ಯತೆಗಳು ದಟ್ಟವಾಗಿವೆ.

ಬಸ್ಸಿನ ಗಾತ್ರದ ಈ ಉಪಗ್ರಹವನ್ನು 1991ರಲ್ಲಿ ಅಮೆರಿಕದ ನಾಸಾ ವಿಜ್ಞಾನಿಗಳು ಉಡಾವಣೆ ಮಾಡಿದ್ದರು. ಅದು 2005ರ ತನಕ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ ಅದು ನಿಧಾನವಾಗಿ ಭೂಮಿಯ ವಾತಾವರಣಕ್ಕೆ ಜಾರಲಾರಂಭಿಸಿತು. ಈ ಪ್ರಕ್ರಿಯೆಯಲ್ಲಿ ಅದು ಛಿದ್ರಗೊಂಡಿದೆ ಎಂದು ಸಂಸ್ಥೆಯ ಮಹಾನಿರ್ದೇಶಕ ಬಿಜಿ ಸಿದ್ದಾರ್ಥ ಅವರು ಹೇಳಿದ್ದಾರೆ.

'5.6 ಟನ್ ತೂಕದ ಈ ಉಪಗ್ರಹದ ಅವಶೇಷಗಳ ಸಣ್ಣ ತುಣುಕುಗಳು ಭೂಮಿಯನ್ನು ತಲಪುವ ಮೊದಲೇ ಉರಿದುಹೋಗಬಹುದು. ಆದರೆ ದೊಡ್ಡ ತುಣುಕುಗಳು ಭೂಮಿಯನ್ನು ತಲಪಬಹುದು. ಯಾವುದೇ ಸ್ಥಳ ಅಥವಾ ವ್ಯಕ್ತಿ ಮೇಲೆ ಇಂಥ ತುಣುಕು ಬೀಳುವ ಸಾಧ್ಯತೆ ಸಾವಿರ ಶತಕೋಟಿಯಲ್ಲಿ ಒಂದಕ್ಕಿಂತಲೂ ಕಡಿಮೆಯಿದೆ. ಆದರೆ ಅವಶೇಷಗಳು ಭೂಮಿಯ ಯಾವುದೋ ಒಂದು ಸ್ಥಳದಲ್ಲಿ ಬೀಳುವ ಸಾಧ್ಯತೆ ಅಧಿಕವಾಗಿದೆ' ಎಂದು ಅವರು ಎಚ್ಚರಿಸಿದ್ದಾರೆ.

ಬಾಹ್ಯಾಕಾಶದಿಂದ ಅವಶೇಷಗಳು ಭೂಮಿಗೆ ಬಡಿಯುವ ಇಂಥ ಘಟನೆ ಈ ಹಿಂದೆಯೂ ಸಂಭವಿಸಿತ್ತು. 1970ರಲ್ಲಿ ಸ್ಕೈಲ್ಯಾಬ್‌ ವ್ಯೋಮನೌಕೆ ಭೂಮಿಗೆ ಬಿದ್ದಿತ್ತಾದರೂ ಯಾವುದೇ ಜೀವಹಾನಿ ಅಥವಾ ಸೊತ್ತು ಹಾನಿ ಸಂಭವಿಸಿರಲಿಲ್ಲ.

ತೀರಾ ಈಚೆಗೆ ವ್ಯೋಮಯಾತ್ರಿ ಕಲ್ಪನಾ ಚಾವ್ಲಾ ಮತ್ತು ಇತರ ಸಿಬ್ಬಂದಿಯನ್ನು ಹೊತ್ತಿದ್ದ ವ್ಯೋಮನೌಕೆ 'ಕೊಲಂಬಿಯಾ' ವಾಯುಮಂಡಲವನ್ನು ಪ್ರವೇಶಿಸುವ ವೇಳೆ ಸ್ಫೋಟಗೊಂಡು ಅದರ ಅವಶೇಷಗಳು ಭೂಮಿಯ ಕೆಲವೆಡೆ ಬಿದ್ದಿತ್ತು. ಆಗ ಕೂಡ ಭೂಮಿಯಲ್ಲಿ ಯಾವುದೇ ಹಾನಿ ಸಂಭವಿಸಿರಲಿಲ್ಲ. ಈ ಬಾರಿಯೂ ಇದು ನಿಜವಾಗಲಿದೆ ಎಂದೂ ಅವರು ವಿಶ್ವಾಸ ಹೊಂದಿದ್ದಾರೆ.

ರಾಧಿಕನ್ ಗಂಡ ಮೇಲೆ ರಾಧಿಕಾ ಕುಮಾರಸ್ವಾಮಿ ಗರಂ

ಹಾಸ್ಯ ಕಲಾವಿದ ಕೋಮಲ್ ಕುಮಾರ್ ವಿರುದ್ಧ ಕನ್ನಡ ಚಿತ್ರರಂಗದ ನಟಿ ಕಮ್ ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಗರಂ ಆಗಿದ್ದಾರೆ. ಆಕೆಯ ಕೋಪಕ್ಕೆ ಕಾರಣವಾಗಿರುವುದು ಕೋಮಲ್ ಕೈಗೆತ್ತಿಕೊಂಡಿರುವ 'ರಾಧಿಕನ್ ಗಂಡ' ಎಂಬ ಚಿತ್ರ. ಈ ಚಿತ್ರದ ಟೈಟಲ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ರಾಧಿಕಾ, ಚಿತ್ರದ ಶೀರ್ಷಿಕೆ ಕೂಡಲೆ ಬದಲಾಯಿಸುವಂತೆ ಎಚ್ಚರಿಸಿದ್ದಾರೆ.

ಒಂದು ವೇಳೆ ಚಿತ್ರದ ಟೈಟಲ್ ಬದಲಾಯಿಸಲಿಲ್ಲ ಎಂದರೆ ಉಗ್ರ ಹೋರಾಟ ನಡೆಸುವುದಾಗಿ ರಾಧಿಕಾ ಸಂದೇಶ ರವಾನಿಸಿದ್ದಾರೆ. ಈ ಬಗ್ಗೆ ಫಿಲಂ ಚೇಂಬರ್ ಮೆಟ್ಟಿಲನ್ನೂ ಹತ್ತಿರುವ ರಾಧಿಕಾ ದೂರು ಸಲ್ಲಿಸಿದ್ದಾರೆ. ಈ ಚಿತ್ರದ ಶೀರ್ಷಿಕೆ ಮೂಲಕ ತಮ್ಮ ತೇಜೋವಧೆ ಮಾಡುತ್ತಿದ್ದಾರೆ ಎಂದು ರಾಧಿಕಾ ದೂರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನಟ ಕೋಮಲ್, ಇದೊಳ್ಳೆ ಕತೆ ಆಯ್ತಲ್ಲ. ಕುಂಬಳಕಾಯಿ ಕಳ್ಳ ಅಂದ್ರೆ ನೀವ್ಯಾಕೆ ಹೆಗಲು ಮುಟ್ಟಿಕೊಳ್ಳುತ್ತೀರಾ. ಇದು ನನ್ನ ಗೆಳೆಯ ರಂಗನಾಥ್ ಭಾರದ್ವಾಜ್ ಕತೆಯಾಕಾಗಿರಬಾರದು? ಆತನ ಪತ್ನಿಯ ಹೆಸರೂ ರಾಧಿಕಾ. ನೀವು ಏನೇ ಹೇಳಿದರು ಚಿತ್ರದ ಶೀರ್ಷಿಕೆ ಮಾತ್ರ ಬದಲಾಯಿಸಲ್ಲ ಎಂದಿದ್ದಾರೆ.

ಇನ್ನೊಂದು ಗಮನಾರ್ಹ ಸಂಗತಿ ಎಂದರೆ ಈ ಸಂಬಂಧ ರಾಧಿಕಾ ನಿರ್ಮಾಪಕರ ಸಂಘಕ್ಕೂ ಒಂದು ಪತ್ರ ಬರೆದಿರುವುದು. ಆ ಪತ್ರದ ಕೆಳಗೆ ರಾಧಿಕಾ ಕುಮಾರಸ್ವಾಮಿ ಎಂದು ಸಹಿಹಾಕಿರುವುದು! ನಿರ್ಮಾಪಕರ ಸಂಘ ಅದನ್ನು ಸೀರಿಯಸ್ಸಾಗಿ ತೆಗೆದುಕೊಂಡಿರುವುದು. ಈಗಾಗಲೆ ನಿಖಿತಾರನ್ನು ಬ್ಯಾನ್ ಮಾಡಿ ನಗೆಪಾಟಲಿಗೀಡಾಗಿದ್ದ ಸಂಘ ಈಗ ಮತ್ತೊಮ್ಮೆ ನಗುವವರ ಮುಂದೆ ಎಡವಿಬೀಳುವಂತಾಗಿದೆ. (ದಟ್ಸ್‌ಕನ್ನಡ ಸಿನಿವಾರ್ತೆ)

ಮೃಗಾಲಯದಲ್ಲಿ ನೂತನ ಗುಳ್ಳೆನರಿ ಮನೆ ಉದ್ಘಾಟನೆ

ಪಾಟೀಲ ಪುಟ್ಟಪ್ಪ ಅಸಮಧಾನ

ಕಂಬಾರರ ಭಾಷೆ ಗರಡಿ ಮನೆಯ ಸ್ತಬ್ಧ ಚಿತ್ರದಂತೆ


“ಸಿಟಿಯ ಕಗ್ಗತ್ತಲೆಯಿಂದ ಪಾರಾಗಲು ಯತ್ನಿಸಿದವರ ಹಾಡು” “ಕೀಟ್ಸನ ಸಾವನ್ನು ನೆನೆದು-ಒಣಗುತ್ತಿತ್ತು ಗಿಡ ತೊಟಕು ನೀರು ಸಹ ಯಾರೂ ಹನಿಸಲಿಲ್ಲ ಸತ್ತಮೇಲೆ ಕಣ್ಣೀರ ಸುರಿಸಿದರು ವಿಧಿಯ ಆಟವೆಲ್ಲ” ಇಂದಿಗೂ ಬದಲಾಗದ “ದಿನಪತ್ರಿಕೆಯ ಸುದ್ಧಿ ಹಣೆಬರಹ “ಅಲ್ಲಿರುವ ನೆಲ, ನೀರು ಹಳದಿ, ಮುಗಿಲೂ ಹಳದಿ, ಜನ ನಕ್ಕರೂ ಹಳದಿ, ಏನು ಮಂದಿ! “ ಈ ನಡುವೆ ನಾವಿದ್ದೇವೆ-ಅದೇ ರಂಗಭೂಮಿ ಮತ್ತು ನಾನು, ಆಪಾದಿಸುತ್ತಾ, ಸಮರ್ಥಿಸಿಕೊಳ್ಳುತ್ತಾ ಪರಸ್ಪರ ನೋವಿನಲ್ಲಿ ಬೆರಳಾಡಿಸುತ್ತಾ....” ಹೀಗೆಲ್ಲಾ ಹೃದಯಕಾಂತಿಗೆ ಸೂರ್ಯನಾಗಿ ದಿಕ್ಕು ತೋರಿಸಿದ ನನ್ನ ಪ್ರೀತಿಯ ಕಂಬಾರರಿಗೆ ಜ್ಞಾನಪೀಠ ಸನ್ಮಾನವಾಗಿದೆ. 8 ಕವನ ಸಂಕಲನ, 22 ನಾಟಕ, 3 ಬೃಹತ್ ಕಾದಂಬರಿಗಳು, ಎಷ್ಟೆಷ್ಟೋ ಕಥೆಗಳು, ಚಿತ್ರಗಳು ಹಾಡುಗಳು ಇನ್ನೂ ಏನೇನೋ ಇವೆಯಂತೆ ಅವರ ಹೆಮ್ಮೆಯ ಮುಡಿಗೆ, ಆದರೆ ನನಗೆ ಮಾತ್ರ ಚಂದ್ರಶೇಖರ ಕಂಬಾರರ ಬರವಣಿಗೆ, ಭಾಷೆ, ಭಾವವೆಂದರೆ ಗರಡಿ ಮನೆಯ ಸ್ತಬ್ಧ ಚಿತ್ರದಂತೆ. ನನ್ನಂತರಂಗದಂತೆ. ಶ್ರೀರಾಮಚಂದ್ರನ ಧರ್ಮದಂತೆ, ಸೀತೆಯ ನಿಷ್ಠೆಯಂತೆ.

ಊರಿನ ಮುದ್ದು, ಮನೆಯವರ ಕಣ್ಮಣಿ, ಮುಂದೊಂದು ದಿನ ಭೂಮಂಡಲದ ಹಾಹಾಕಾರವ ನೀಗುವ ಶಕ್ತಿಯಾದರೂ ಅಮ್ಮನಿಗೆ ಮಾತ್ರ ಮಗು “ನನ್ನ ಬಂಗಾರ” ತಾನೆ? ಹಾಗೇ, ಬೇಂದ್ರೆ ಅಜ್ಜನ ನಂತರ ಭಾಷೆಯನ್ನು ಅದ್ಭುತವಾಗಿ ಕಟ್ಟಿಕೊಟ್ಟವರು ಕಂಬಾರರು ಅಂತ ಪಂಡಿತರು ಹೇಳುತ್ತಿದ್ದರೂ ನನಗೆ ಮಾತ್ರ ತೀರ್ಥರೂಪು “ನನ್ನ ಕಂಬಾರರು” ಅಷ್ಟೆ. ಅದಕ್ಕೆ ಒಂದಷ್ಟು ದಿನಗಳ ಹಿಂದೆ ಪಾಂಡಿತ್ಯ ಪ್ರಖರರೊಬ್ಬರೊಂದಿಗೆ ಸರಿಸುಮಾರು ಯುದ್ಧವನ್ನೇ ಮಾಡಿದ್ದೆ. ಅವರ ಪ್ರಕಾರ ಇಂಗ್ಲಿಷಿಗೆ ಅಸಾಧ್ಯವೆಂಬುದೇ ಇಲ್ಲ! ನಾನು ಕೇಳಿದ್ದು ಸಣ್ಣ ಪ್ರಶ್ನೆಯಷ್ಟೆ, ಕಂಬಾರರ “ಗೌತಮ ಕಂಡ ಪ್ರಥಮ ದರ್ಶನ” ಪದ್ಯದ ಈ ಸಾಲುಗಳನ್ನು ಇಂಗ್ಲಿಷಿಗೆ ತನ್ನಿ ಅಂತ “ಗದಬಡಿಸಿ ಗದಬಡಿಸಿದವನೆ ಹುಡುಕಾಡಿ, ಹುಡುಕಾಡಿದವನೆ ಕೊನೆಗೆ ಹಾಸಿಗೆಗೆ ಬಂದು ನೋಡುತ್ತೇನೆ: ನನ್ನ ಪಾಲಿನ ಹುಡುಗಿ ಇದಕೆ ಹಾಸುಗೆಯಾಗಿ, ಅರೆಗಣ್ಣ ತುದಿಯ ಸೂರು ಜತಿಯಗುಂಟ ಸ್ವರ್ಗದುಯ್ಯಾಲೆ ಕಟ್ಟಿದಹಲ್ಯೆ.” “ತಪ್ಪಿದ್ದರೆ ಕ್ಷಮಿಸಿ ನಾನು ಅಧಮಳು” ಅಂದರೂ ಉತ್ತಮರ ಸಿಟ್ಟು ಇಂದಿಗೂ ಇಳಿದಿಲ್ಲ!

ಕನ್ನಡವೆಂದರೆ ಕಂಬಾರರು ಅಷ್ಟೆ : ಅಂದಹಾಗೆ, ಆ ದಿನ ಬಾಗಿಲು ತೆರೆದಾಗ ಅಯ್ಯರ್ ಮಾಮ ಜೋರಾಗಿ ನಗುತ್ತಾ ಒಳಬಂದರು. ಮಾಮಿಗೆ ಸಂಕೋಚ. ಸೆರಗು ಸರಿ ಮಾಡ್ಕೊಳ್ಳುತ್ತಾ ಗಂಡ ಆಗಲೇ ಪಟ್ಟಾಂಗ ಹಾಕಿಕೊಂಡಿದ್ದ ಸೋಫಾ ಮೆಲೆ ಕುಳಿತರು. ಸೌಜನ್ಯಕ್ಕೆ “ತೊಟ್ಟು ಹಾಲು ಕೊಡಲೇ” ಎಂದೇ. ಅಷ್ಟೇ ಸಾಕು ಮಾಮಾ ತಮಿಳು ಮಿಶ್ರಿತ ಇಂಗ್ಲಿಷ್ನಲ್ಲಿ ಹೇಳ್ತಾ ಹೋದರು “ಕೆಳಜಾತಿಯ ತಮಿಳರಿಗೆ ನಾಲಿಗೆ ಹೊರಳದೆ ತಮಿಳನ್ನು ಅಪಭ್ರಂಶಗೊಳಿಸಿದರು. ಅದೇ ಕನ್ನಡವಾಯ್ತು. ಪಾಲು ಹಾಲಾಯ್ತು. ಇಲ್ಲದಿದ್ದರೆ ಕನ್ನಡಕ್ಕೆ ಸ್ವಂತ ಅಸ್ತಿತ್ತ್ವವೆ ಇಲ್ಲ. ಅದು ಭಾಷೆಯೇ ಅಲ್ಲ. ನಿನಗೆ ಗೊತ್ತಾ? ಸರಸ್ವತಿ ತಮಿಳರ ದೇವತೆ” ಹೀಗೆ ಇನ್ನೂ ಏನೇನೋ. ನನಗೆ ಅದೆಲ್ಲಾ ತಿಳಿಯೋಲ್ಲ. ನನಗೆ ಕನ್ನಡವೆಂದರೆ ಶಾಲೆಯಲ್ಲಿ ಮುದ್ದಣನ ಶ್ರೀಮತಿ ಸ್ವಯಂವರ ಹೇಳಿಕೊಟ್ಟ ಪದ್ಮಾ ಮಿಸ್ ಮತ್ತು ಚಂದ್ರಶೇಖರ ಕಂಬಾರರು ಅಷ್ಟೆ!

ಮಾಮಿಗೆ ಮುಜುಗರವಾಗ್ತಿತ್ತು. ಹಿರಿಯರನ್ನು ಹೀಗೆಳೆಯುವುದು ನಮ್ಮ ಸಂಸ್ಕೃತಿಯಲ್ಲ್ವಲ್ಲಾ? ಅದಕ್ಕೆ ವಾತಾವರಣ ತಿಳಿ ಮಾಡಲು, ಒಳಗೆ ಹೋಗಿ ಮಾಡಿದ್ದ ಹೆಸರುಬೇಳೆ ಕೋಸಂಬರಿಯನ್ನು ಬಟ್ಟಲುಗಳಿಗೆ ಹಾಕಿ ತಂದುಕೊಟ್ಟೆ. ತತ್ಕ್ಷಣ ಮಾಮಾ “ಅರೆ, ಇದು ತಮಿಳರ ತಿಂಡಿ. ನೀನು ಹೇಗೆ ಕಲಿತೆ?” ಅಂದು ಬಿಡೋದೇ? ಸಿಟ್ಟು ಕ್ರೂರ ಸೂರ್ಯನಂತೆ ನೆತ್ತಿ ಸುಡುತ್ತಿದ್ದರೂ, ನಾನು ಪ್ರತಿಭಟಿಸಲಿಲ್ಲ. ಇತ್ತೀಚೆಗೆ ಕಂಬಾರರೇ ನನ್ನ ಮೌನಕ್ಕೂ ಕನ್ನಡದಲ್ಲಿ ಮಾತನಾಡುವ ಸೊಗಡನ್ನು ಪರಿಚಯಿಸಿಕೊಟ್ಟಿದ್ದಾರೆ. ಹಾಗಾಗಿ ನನ್ನ ನಾಳೆಗಳು ಅವರೇ ಹೇಳಿದಂತೆ ಸಂಸ್ಕೃತಿಯಿಂದ ವಿಸ್ಮೃತಿಗೊಳ್ಳಲಾರದೆಂಬ ಭರವಸೆಯಿದೆ, ಹೇಗೆಂದಿರಾ? ಅವರ ಶಿವಾಪುರದ ಪ್ರತಿಮೆಗಳಲ್ಲಿ ಒಂದಾದ ಪದ್ಯ ಸಾಲುಗಳು ಕೇಳುತ್ತ್ವೆ “ಬೇಕಾದಷ್ಟು ಕನಸುಗಳಿವೆಯಲ್ಲಾ ಬದುಕಕ್ಕೆ ಇನ್ನೇನು ಬೇಕು ಗೆಳತಿ...?” ಹೀಗೆ ಕಂಡ ಕನಸೊಂದು ಇಂದು ನನಸಾಗಿದೆ. ಕಂಬಾರರ ಪಾದಕ್ಕೆರಗಿ ಪೀಠದ ಜ್ಞಾನ ಸ್ಫಟಿಕದಂತೆ ಸ್ಫುರಿಸಿದೆ. ಜ್ಞಾನಪೀಠದ ಔನತ್ಯವನ್ನು ಹೆಚ್ಚಿಸಿರುವ ಹಿರಿಯರ ಚರಣಸ್ಪರ್ಶಿಸುತ್ತಿರುವ ಈ ಸಮಯದಲ್ಲಿ ನನ್ನ ಮನಸ್ಸಿನಲ್ಲಿ ಕಂಬಾರರು ಹಾದುಹೋದದ್ದು ಹೀಗೆ

ಕಣ್ಣೀರ ಹನಿಯಲೂ ಶಾಖವಾದ ಕಂಬಾರರ ಸಾಹಿತ್ಯ* ಅಂಜಲಿ ರಾಮಣ್ಣ, ಬೆಂಗಳೂರು

ಅದು ಕಂಬಾರರ ’ಜೈಸಿದ ನಾಯ್ಕ’ ನಾಟಕ. ಮೊದಲ ಬಾರಿಗೆ ರಂಗದ ಮೇಲೆ ತರಲಾಗ್ತಿತ್ತು. ಅದರಲ್ಲಿ ಬರೋದೇ ಎರಡು ಹೆಣ್ಣು ಪಾತ್ರ. ನಾನು ನಾಯಕಿ. ಗಂಗಾಧರಸ್ವಾಮಿಯವರ ನಿರ್ದೇಶನ. ಎರಡು ತಿಂಗಳುಗಳ ಕಾಲದ ಹಗಲಿರುಳಿನ ಅಭ್ಯಾಸ. ಆ ದಿನ ಪ್ರಥಮ ಪ್ರದರ್ಶನ ಮೈಸೂರಿನ ಕಲಾಮಂದಿರದಲ್ಲಿ. ಮೊದಲ ಸಾಲಿನ ಪ್ರೇಕ್ಷಕರಾಗಿ ಕುಳಿತ್ತಿದ್ದಾರೆ ಡಾ.ಚಂದ್ರಶೇಖರ ಕಂಬಾರ, ಕೀರ್ತಿನಾಥ ಕುರ್ತುಕೋಟಿ, ಡಾ.ಗಿರೀಶ್ ಕಾರ್ನಾರ್ಡ್ ಮತ್ತೆಲ್ಲಾ ಉತ್ತಮೋತ್ತಮರು. ಆಗ ಚೆಲುವಿನ ಅಹಂವುಳ್ಳ ಆತ್ಮ, ವಿಶ್ವಾಸದ ಉತ್ತುಂಗದಲ್ಲಿದ್ದ ವಯಸ್ಸದು ನೋಡಿ ಅದಕ್ಕೆ ಅವರ್ಯಾರೂ ನನ್ನ ಟಾರ್ಗೆಟ್ ವೀಕ್ಷಕರಲ್ಲ! ನಾಟಕದ ಕೊನೆ ಚಪ್ಪಾಳೆಗಳ ಸುರಿಮಳೆ. ಮೇಲೆದ್ದ ಕುರ್ತುಕೋಟಿಯವರು “ನೀನು ಧಾರವಾಡ್ದವಳೇನು?” ಅಂತ ಕೇಳಿದ್ರು ಅದಕ್ಕೆ ಕಂಬಾರರು “ಆಕೀ ಒಡೆಯರ್ರ ಮಗಳು ನೋಡ್ರೀ” ಅಂತ್ಹೇಳಿ ನಕ್ಕರು. ನನಗೆ ಹೆಮ್ಮೆಯೂ ಇಲ್ಲ ಹೆಚ್ಚುಗಾರಿಕೆಯೂ ಅಲ್ಲ. ಹರೆಯದ ಕೈಯಲ್ಲಿತ್ತಲ್ಲ ಬುದ್ಧಿ ಅಂದ್ಮೇಲೆ ಯಾವುದರ ಬೆಲೆತಾನೇ ತಿಳಿದೀತು?

ಬಣ್ಣ ಕಳಚಿತು. ಕಣ್ಣ್ತುಂಬಾ ನಿದ್ದೆಯೂ ಆಯ್ತು. ಮಾರನೆಯ ಸಂಜೆ ಖಾಲೀ ಖಾಲೀ. ನಾಟಕ ತಾಲೀಮು ಇಲ್ಲವಲ್ಲ?! ಆಗ ನನ್ನೊಳಗೆ ಆವಾಹನೆಯಾಗಿದ್ದು ಕಂಬಾರರ “ಅಕ್ಕಕ್ಕು ಹಾಡುಗಳೇ”. “ಬರಗಾಲ ಬಂತೆಂದು ಬರವೇನೋ ಹಾಡಿಗೆ, ಮನಸಿಗೆ ನಿನ್ನ ಕನಸಿಗೆ; ಹರಿಯುವ ಹಾಡನ್ನ ಕತ್ತಲ್ಲಿ ಅಮುಕದೆ ಬಿಡಬೇಕೋ ತಮ್ಮ ಬಯಲಿಗೆ....” ಓಹ್, ಇದನ್ನು ಹಾಡಾಗಿಸಿದ ದೇವರಲ್ಲವೇ ನೆನ್ನೆ ನನ್ನೆದುರು ಇದ್ದದ್ದು? ತಡಾವಾಗಾದ ಜ್ಞಾನೋದಯಕ್ಕೆ ಮರುಕವೇ ಶಿಕ್ಷೆ. ಆಗ ಮನೆಯಲ್ಲಿ ವೆರಾಂಡದಿಂದ ಅಡುಗೆ ಕೋಣೆಯವರೆಗೂ ಪುಸ್ತಕವೇ ಆಸ್ತಿ ಆಗಿದ್ದರೂ ಎಲ್ಲೂ ಕಂಬಾರರ ಒಂದು ವಾಕ್ಯವೂ ಸಿಗದ್ದು. ಅಮ್ಮನಿಗೆ ದುಂಬಾಲು ಬಿದ್ದೆ. ಲೈಬ್ರರಿಯಿಂದ ಅದೇನೆನೋ ಲೇಖನಗಳು ಮನೆಗೆ ಬಂದವು. ಲ್ಯಾಂಡ್ಸ್ಡೌನ್ ಕಟ್ಟಡದ ಮಳಿಗೆಗಳನ್ನೂ ಸುತ್ತಿದ್ದಾಯ್ತು, ಪ್ರಸಾರಾಂಗವನ್ನೂ ಇಣುಕಿದ್ದಾಯ್ತು. ಆದರೂ ಸಮಾಧಾನವಿಲ್ಲ. “ಕ್ಷಿತಿಜದ ಕಣ್ಣಲ್ಲಿ ಬೆಳಕು ಹೊಳೆಯೋ ಹಾಂಗ ಹಾಡಬೇಕೋ ತಮ್ಮ ಹಾಡಬೇಕು; ಆಕಾಶದಂಗಳ ಬೆಳದಿಂಗಳೂ ಕೂಡಾ ಕಂಗಾಲಾಗುವ ಹಾಡು ಹಾಡಬೇಕೋ....” ಹೀಗೇ ನಿರಂತರವಾಗಿ ಹಾಡ್ಕೋತಾ ಹಾಡ್ಕೋತಾ ಕಂಬಾರರ ಪದಗಳೊಂದಿಗೆ ಪ್ರೀತಿಗೆ ಬಿದ್ದೆ. ಅವರ ಅಕ್ಷರದೆಡೆಗಿನ ನನ್ನ ಮೋಹ ಕಾಡುಕುದುರೆಯಂತೆ.

ಅದ್ಯಾವ ಲೋಕದಲ್ಲಿ ನನ್ನ ಪಯಣ? : “ಮುಗಿಲಿನಿಂದ ಜಾರಿಬಿದ್ದ ಉಲ್ಕೀ ಹಾಂಗ ಕಾಡಿನಿಂದ ಚಂಗನೆ ನೆಗೆದಿತ್ತ” ನನ್ನನ್ನು “ಏಳಕೊಳ್ಳ ತಿಳ್ಳೀ ಆಡಿ ಕಳ್ಳೆಮಳ್ಳೆ ಆಡಿಸಿ ಕೆಡವಿತ್ತ...” ಆಮೆಲೆ ಸಿಕ್ಕಿದ್ದು “ಮರೆತೇನಂದರ ಮರೆಯಲಿ ಹೆಂಗಾ ಮಾವೊತ್ಸೆ ತುಂಗಾ” ಅಂತಿದ್ದ ಕಂಬಾರರು. “ಸೊನ್ನಿಗೆ ಆಕಾರ ಬರೆದೇನಂದಿ, ಬಯಲಿಗೆ ಗೋಡೆ ಕಟ್ಟೇನಂದಿ......ಮರೆಯಲಿ ಹೆಂಗಾ ಮಾವೊತ್ಸೆ ತುಂಗಾ” ಸಾಲುಗಳು ನನ್ನೆಲ್ಲಾ ಅಂತಃಸತ್ತ್ವವನ್ನು ಪ್ರತಿಫಲಿಸುತ್ತಿತ್ತು ಆ ದಿನಗಳಲ್ಲಿ. ಮತ್ತೊಮ್ಮೆ ರಂಗದ ದಿನಗಳು. ಕಂಬಾರರ ಕರಿಮಾಯಿ ತಾಯೇ ಸಾಲುಗಳನ್ನು, ಬಿ.ಜಯಶ್ರೀ ಧ್ವನಿಪೆಟ್ಟಿಗೆಯ ಕಂಚು ಉಜ್ಜಿತೆಂದರೆ ಆಹಾ, ಅದ್ಯಾವ ಲೋಕದಲ್ಲಿ ನನ್ನ ಪಯಣ? “ಗುಂಡ ತೇಲಿಸಿದೆವ್ವ ಬೆಂಡ ಮುಳುಗಿಸಿದಿ; ಗಂಡಗಂಡರನೆಲ್ಲ ಹೆಂಡಿರ ಮಾಡಿ....ಸಾವಿರದ ಶರಣವ್ವ ಕರಿಮಾಯಿ ತಾಯೇ....” ಸಾಲುಗಳ ಮುತ್ತುದುರಿಸುತ್ತಾ ಭಾಷಣಗಳಲ್ಲಿ ಮೇಜುಗುದ್ದುತ್ತಿದ್ದ ದಿನಗಳವು. ಇವರ ಮತ್ತೊಂದು ಪದ್ಯ “ಗಿಣಿರಾಮ ಹೇಳಿತು” ಅದಕ್ಕೆ ಬಿ.ವಿ ಕಾರಂತರ ಸಂಗೀತ “ಗಿಣಿರಾಮ ಹೇಳಿದ ರೇಪಿನ ಕಥೆಯೊಂದ; ರಾಮಾ ಹರಿ ರಾಮಾ, ಮಾನಭಂಗಿತಳಾಗಿ ಕನಸೊಂದು ಬಿದ್ದಿದೆ; ರಾಮಾ ಹರಿ ರಾಮಾ” ಅಂತ ಕಾರಂತರು ಹಾಡ್ತಿದ್ದರೆ ಅದೆಲ್ಲಿರುತ್ತಿತ್ತೋ ನನ್ನ ಕಣ್ಣೀರು ಝುಳು ಝುಳು ಹರೀತಿತ್ತು.

ಚುಂಚದ ಹಕ್ಕಿ ಗಕ್ಕನೆ ಹಾರಿ ಬಂತು : ಹೀಗೆ ಒಂದೊಂದು ಕಣ್ಣೀರಿನ ಹನಿಯಲ್ಲೂ ಕಂಬಾರರ ಸಾಹಿತ್ಯ, ಭಾಷೆ ಎಲ್ಲವೂ ನನ್ನೊಳಗೇ ಶಾಖವಾಗ್ತಾ ಹೋಯ್ತು. “ಸ್ವಂತಚಿತ್ರ ಬರೆಯೋದು ಕಷ್ಟವಲ್ಲ ಮಿತ್ರ”, "ಇಬ್ಬರ ತಕರಾರಿಗೆ ಹುಟ್ಟಿ ಹಲವರ ತಕರಾರಲ್ಲಿ ಬೆಳೆದವರು ನಾವು ತಕರಾರಿನವರು” ಎನ್ನುತ್ತಾ ಕಥೆಗೆ ಶುರುವಿಟ್ಟ ಕಂಬಾರರು, “ನನ್ನ ಮನದಾಗರೆ ಇದು ಏನ ಬೆಳೆದೈತಿ? ತುಂಬ ಮಲ್ಲೀಗಿ ಹೂಬಳ್ಳಿ; ಉದುರೀಸಿ ನಿನ್ನ ಪಾತಾಳ ತುಳುಕಲಿ” ಎಂದೆನ್ನುವ ಅರಗೊಡ್ಡಿಯ ಪ್ರೇಮಗೀತೆಯಾಗಿಸತೊಡಗಿದರು ನನ್ನನ್ನು. ಋಷ್ಯಶೃಂಗನ ನಾಟಕೀಯತೆಯಲ್ಲಿ “ಅಪ್ಪ ಸೂತ್ರಧಾರ ಕೇಳೋ ಕನಸ ಕಂಡಿನೆ, ಸುಖದ ನೋವ ಸದ್ದ ಮಾಡಿ ಹೆಂಗ ಹೇಳಲೆ” ಎಂದು ಉನ್ಮಾದಕ್ಕೆ ತಳ್ಳುತ್ತಾ, ಕಲೆಗಾರಣ್ಣನ ಲಾವಣಿಯಲ್ಲಿ “ಇಷ್ಟೆ ಕಣ್ಣಿನ ಇಷ್ಟಿಷ್ಟೆ ಚುಂಚದ ಹಕ್ಕಿ ಗಕ್ಕನೆ ಹಾರಿ ಬಂತು ಮೇಲಕ್ಕೆ ಕೆಳಕ್ಕೆ ರೆಂಬೆ ರೆಂಬೆಗೆ, ಕೊಂಬೆ ಕೊಂಬೆಗೆ ಸೋಂಕಿನ ಸೊಗಸ ಬೀರುತ, ಕಲೆಗಾರನ ಕಲ್ಪನೆಗೆ ಶರಣೆನ್ನಿರಿ” ಎಂದು ಕುಣಿಸುತ್ತಾ, “ವ್ಯರ್ಥಗಳ ಸಮರ್ಥಿಸಿಕೊಳ್ಳುತ್ತಾ, ಅಪಾರ್ಥದಲ್ಲಿ ಅರ್ಥಗಳ ಸೃಷ್ಟಿಸುತ್ತಾ, ಇಲ್ಲಾ ರಾಮಾಯಣದ ಮಹಿಮೆ ಜಪಿಸುತ್ತಾ” ಗೋದೂ ತಾಯಾಗಿಸಿ ನನ್ನೊಡನೆ ನನ್ನನ್ನು ಇಬ್ಬರಾಗಿಸಿ “ರೆಕ್ಕೆಯೊಳಗಿನ ಹಕ್ಕಿಯ ಥರ ನಮ್ಮ ನೆರಳುಗಳನ್ನೇ ಮೈಗೂ ಮನಸ್ಸಿಗೂ ಸುತ್ತಿಕೊಂಡು ಉರಿವ ಬೆಂಕಿಯ ಬಳಿ ಕೂತೆವು” ಎಂದೆಂದುಕೊಳ್ಳುವಂತೆ ಮಾಡಿಟ್ಟರು. ನಾನು ಒಳಗೇ ಹೇಳುತ್ತಾ ಹೋದೆ ಅವರದೇ ನುಡಿಯಾಗಿ “ಒಂದಾನೊಂದು ಕಾಲದಲ್ಲಿ ಏಸೊಂದ ಮುದವಿತ್ತಾ, ಮುದಕೊಂದು ಹದವಿತ್ತಾ, ಹದಕ ಹಂಗಾಮಿತ್ತಾ, ಅದಕೊಂದ ಶಿವನ ಲಗಾಮಿತ್ತಾ” “ನಾನೀಗ ನನ್ನ ಖಾಸಗಿಯನ್ನು ಕಾಣಬೇಕು. ಮಾತಾಡಬೇಕು ಅದರೊಂದಿಗೆ ನಿಜ ನೋಡಬೇಕು, ಶಬ್ದವೇ ಶಬ್ದವೆ ತೋರು ನಿಜವನ್ನ,ನನ್ನಳತೆಯ ಮನುಷ್ಯನಳತೆಯ ಸತ್ಯವನ್ನ.”

“ಜೋಲಿ ತಪ್ಪಿದ ಪೋರಿ ಬಿದ್ದಾಳ ತೆಕ್ಕೀಗಿ, ಸಂದ ಉಳಿಯದ ಹಾಂಗ ಒಂದಾಗಿ ಮೈಮುರದಾ” ಅನ್ನೋ ಹಾಗೆ ನನ್ನನ್ನು ಜೀವನದೊಳಗೆ ಒಂದು ಮಾಡಿ “ಮಂದಾರ ಮರದಲ್ಲಿ ಪಾರ್ವತಿ ಹಣ್ಣು ತಿಂದದ್ದೇ ದೇವಲೋಕಕ್ಕೂ ಬಂತು ಹಸಿವಿನ ಬಾಧೆ” ಅದಕ್ಕೇ, “ಹಾವಲ್ಲ ಅದು ಹಗ್ಗ ಎನ್ನುವರು ಕೆಲಮಂದಿ ಹಗ್ಗದಲ್ಲೂ ಹರ್ಷ ಚಿಮ್ಮುವಾಕೆ ಈ ಮಾಯೆ” ಎನ್ನುವ ಅರಿವು ನನಗೆ ಮೂಡಿಸಿದ್ದು ಈ ಸೂರ್ಯ ಶಿಖರನ ಸಾಹಿತ್ಯ. “ಲೂಟಿ ಮಾಡಾಕ ಬಂದ ಮಾಟಗಾರೇನ ಸುಖದ ಶಿಖರದ ಮ್ಯಾಲ ಹತ್ತಿನಿಂತಾನ ಇಕ್ಕಟ್ಟೀನ ಬಿಕ್ಕಟ್ಟೆಲ್ಲಾ ಒಟ್ಟಿಗಿ ದೂರ ಮಾಡಿದ್ದ” “ಯಾರವ್ವ ಈ ಚೆಲುವ ತಂತಾನೆ ರಂಜಿಸುವ ಸೂರ್ಯನ ಥರ ಹೊಳೆಯುವ” ಅಂತ ಮನಸ್ಸಿನಲ್ಲೇ ನಾನು ಮುಲುಗುತ್ತಿರುವಾಗಲೇ ನಾಳಿನ ಸತ್ಯವನ್ನು ಇಂದೇ ಬಯಲಾಗಿಸಿಕೊಟ್ಟದ್ದು ಅವರ ಮಾತು ““ಅಜ್ಜ ಅಜ್ಜಿಗೆ ಬೇಜಾರು ನೆನಪೂ ಬೋರು, ಕುರುಡ ಮುದುಕ ಕೈಯಾಡಿಸಿ ಹುಡುಕುತ್ತಾನೆ ಎಲ್ಲಿದ್ದೀಯೆ ಮುದುಕಿ ಎಲ್ಲಿದ್ದೀಯೆ?”

ಮಂಗಳವಾರ ಹೆಣ್ಣುಮಗುವನ್ನು ಬೀದಿಗೆಸೆದ ಮಹಾತಾಯಿ


ಯಾದಗಿರಿ, ಸೆ. 20 : ಮಂಗಳವಾರ ಹೆಣ್ಣುಮಕ್ಕಳಿಗೆ ಮಂಗಳಕರ ವಾರ ಅಂತಾರೆ. ಆದರೆ, ಮಂಗಳವಾರವೆ ಬೆಳಗಿನ ಜಾವ 6 ಗಂಟೆ ಸುಮಾರಿಗೆ ತಾಯಿಯೊಬ್ಬಳು 6 ತಿಂಗಳ ಹೆಣ್ಣುಮಗುವನ್ನು ಬೀದಿಗೆಸೆದು ಹೋದ ಅಮಾನವೀಯ ಮತ್ತು ಹೃದಯವಿದ್ರಾವಕ ಘಟನೆ ನಗರದಲ್ಲಿ ನಡೆದಿತೆ.

ನಗರದ ಸಿಂಡಿಕೇಟ್ ಬ್ಯಾಂಕ್ ಎದುರು ಬೀದಿಯಲ್ಲಿ ಬಿದ್ದಿದ್ದ ಹಸುಗೂಸನ್ನು ಪ್ಲಾಸ್ಟಿಕ್ ಆಯುವವರು ನೋಡಿ ವಾಕಿಂಗ್ ಮಾಡುವವರಿಗೆ ತಿಳಿಸಿದ್ದಾರೆ. ಮಗು ಅಸುನೀಗಿತ್ತು, ಮೂಗಿನಲ್ಲಿ ಕಿವಿಯಲ್ಲಿ ರಕ್ತ ಬಂದಿತ್ತು. ಬೇಡದ ಮಗುವನ್ನು ಕೊಲೆ ಮಾಡಿ ಬಿಸಾಕಿರಬಹುದು ಎಂದು ಅನುಮಾನಿಸಲಾಗಿದೆ.

ನವಜಾತ ಶಿಶುವನ್ನು ಎಸೆದು ಹೋದ ಪ್ರಕರಣಗಳು ಯಾದಗಿರಿ ಜಗುಗುತ್ತಿದ್ದು, ಇದು 3ನೆಯ ಪ್ರಕರಣವಾಗಿದೆ. ಮಕ್ಕಳಿಲ್ಲದವರು ನಮ್ಮ ದೇಶದಲ್ಲಿ ಬಹಳಷ್ಟು ಜನರಿದ್ದಾರೆ. ಮಕ್ಕಳಿಗಾಗಿ ಕಂಡ ಕಂಡ ಕಲ್ಲು ದೇವರಿಗೆ ಕೈಮುಗಿಯುತ್ತಾರೆ. ಮಕ್ಕಳಿಲ್ಲದವರಿಗೆ ಇಂಥ ಮಕ್ಕಳನ್ನು ನೀಡಿದ್ದರೆ ತಾಯ ಮಡಿಲನ್ನು ತುಂಬಬಹುದಾಗಿತ್ತು. ಮಕ್ಕಳನ್ನು ಬೀದಿಗೆಸೆಯುವ ಇಂಥ ತಾಯಂದಿರಿಗೆ ಶಿಕ್ಷೆಯಾಗಬೇಕು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.